
ಗ್ರಾಮೀಣ ಪ್ರದೇಶದ ಅಭಿವೃದ್ಧಿ ಅವಶ್ಯ – ಕ್ಯಾ.ಬ್ರಿಜೇಶ್ ಚೌಟ
ಪುತ್ತೂರು, ಫೆ. 21: ಗುಡಿ ಕೈಗಾರಿಕೆಗಳಿಗೆ ಮಾರುಕಟ್ಟೆ ಒದಗಿಸುತ್ತಿರುವ ಸರಸ್ ಮೇಳದಂತಹಾ ಮೇಳಗಳು ಗ್ರಾಮೀಣಾಭಿವೃದ್ಧಿಗೆ ಸಹಕಾರಿ. ಉದ್ಯೋಗದ ಸಂದರ್ಶನ ಎಂದರೆ ಅದು ಒಂದು ಕಲಿಕೆಯೇ ಆಗಿದೆ. ಒಮ್ಮೆ ಹಿನ್ನಡೆ ಆಯಿತು ಎಂದಾದರೆ ಬದುಕು ಅಲ್ಲಿಗೆ ಮುಗಿಯಿತು ಎಂದಲ್ಲ. ಕೌಶಲ್ಯ ಹಾಗೂ ಪ್ರತಿಭೆಗಳನ್ನು ನಾವು ಬೆಳೆಸಿಕೊಳ್ಳಬೇಕು. ಉದ್ಯೋಗ ಹಾಗೂ ಇನ್ನಿತರ ಅವಕಾಶಗಳ ಬಗ್ಗೆ ನಾವು ಜಾಗೃತರಾಗಬೇಕು. ಹಾಗೂ ಇತರರಿಗೆ ಆ ಬಗ್ಗೆ ಅರಿವು ಮೂಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಾವರ್ಕರ್ ಸಭಾಂಗಣದಲ್ಲಿ ಭಾರತ ಸರ್ಕಾರದ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ಕೆ.ಎಸ್.ಆರ್.ಎಲ್.ಪಿ.ಎಸ್ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಉದ್ಯೋಗದ ಸಂದರ್ಶನದಲ್ಲಿ ಅನಗತ್ಯ ಭಯ ಬೇಡ. ಅನುಭವದ ಮೂಲಕ ಬದುಕನ್ನು ರೂಪಿಸಿಕೊಳ್ಳಬೇಕು. ಪಠ್ಯದ ಕಲಿಕೆಯೊಂದಿಗೆ ಪ್ರಾಯೋಗಿಕ ಜ್ಞಾನವೂ ಜೀವನದಲ್ಲಿ ಅತ್ಯಗತ್ಯ. ಸಾಧನೆ ಮಾಡುವತ್ತ ಮುಂದುವರಿದವರನ್ನು ಪ್ರಶಂಸಿಸಬೇಕು. ನಮ್ಮ ಜಿಲ್ಲೆಗಳಲ್ಲಿಯೇ ಉದ್ಯೋಗ ನಿರ್ಮಾಣ ಮಾಡಿ ಅಭಿವೃದ್ಧಿ ಆಗುವಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ಆಶಿಸಿದರು.
ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಗ್ರಾಮೀಣಾಭಿವೃದ್ಧಿ ಆಗಬೇಕೆಂದರೆ ವಿವಿಧ ಕಂಪೆನಿಗಳು ಹಳ್ಳಿಗಳತ್ತವೂ ಗಮನ ಹರಿಸಬೇಕು. ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ದೇಶಪ್ರೇಮ ಅವಶ್ಯ. ನಮ್ಮ ಬೆಳವಣಿಗೆಯಲ್ಲಿ ನಮ್ಮ ದೇಶದ ಪಾತ್ರವಿರುವಾಗ ನಾವೂ ದೇಶಕ್ಕೆ ಏನಾದರೂ ಕೊಡುಗೆ ಸಲ್ಲಿಸಬೇಕು. ನಮ್ಮ ಪ್ರಯತ್ನ ನಿರಂತರವಾಗಿರಲಿ ಎಂದರು.
ಉದ್ಯೋಗ ದೇಶದ ಅಭಿವೃದ್ಧಿಗೆ ಬುನಾದಿ ಹಾಕಿಕೊಡುತ್ತದೆ. ದೇಶದ ಉನ್ನತಿಗೆ ಯುವಜನರ ಪಾತ್ರ ದೊಡ್ಡದು. ನಾವು ಉದ್ಯೋಗ ಕೈಗೊಳ್ಳುತ್ತಿರುವ ಸಂಸ್ಥೆಯ ಅಭಿವೃದ್ಧಿಗೂ ಶ್ರಮಿಸಬೇಕು ಎಂದು ವಿಧಾನ ಪರಿಷತ್ತಿನ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಯೋಗ ಮೇಳಗಳಲ್ಲಿ ಯುವಜನರು ಅವಶ್ಯವಾಗಿ ಭಾಗವಹಿಸಬೇಕು. ತಂತ್ರಜ್ಞಾನ ಎμÉ್ಟೀ ಮುಂದುವರಿದರೂ ಉದ್ಯೋಗ ಅವಕಾಶಗಳು ಇದ್ದೇ ಇರುತ್ತದೆ. ಎಂದಿಗೂ ನಕಾರಾತ್ಮಕವಾಗಿ ಚಿಂತನೆ ಮಾಡಕೂಡದು. ಉದ್ಯೋಗ ಎಲ್ಲರಿಗೂ ಬೇಕಾಗಿದೆ ಎಂದರು.
ವೇದಿಕೆಯಲ್ಲಿ ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಅಭಿಯಾನ(ಎನ್.ಆರ್.ಎಮ್.ಎಲ್) ದ ಉಪನಿರ್ದೇಶಕ ಜಗನ್ನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಮ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪುತ್ತೂರು ಮತ್ತು ಕಡಬ ತಾಲೂಕು ಪಂಚಾಯತ್ ಅಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿದರು. ದ.ಕ ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ವಂದಿಸಿದರು. ವಿವೇಕಾನಂದ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ.ಎಸ್ ನಿರ್ವಹಿಸಿದರು.
ಸುಮಾರು 132 ಕಂಪನಿಗಳು ಉದ್ಯೋಗ ಮೇಳದಲ್ಲಿ ಬಾಗವಹಿಸಿದ್ದು ಸುಮಾರು 2500 ಸಾವಿರ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದರು.
